
ಮಂಡ್ಯ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿಗೂ ಹೆಚ್ಚು ಹಣವನ್ನು ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈಸೂರು ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ (Money Seize) ಪಡೆಯಲಾಗಿದೆ.
ಕ್ರೆಟಾ ಕಾರಿನಲ್ಲಿ ಕೊಂಡೊಯ್ಯುತ್ತಿದ್ದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.



ಗಿರೀಶ್ ಎಂಬುವವರು ತಮ್ಮ ಕ್ರೆಟಾ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ಪೇಟೆ ಕಡೆಗೆ ಪ್ರಯಾಣ ಮಾಡುತ್ತಿದ್ದರು. ಕೊಂಗಬೋರನದೊಡ್ಡಿ ಗ್ರಾಮದ ಬಳಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಆರಂಭಗೊಂಡಿರು ಚೆಕ್ಪೋಸ್ಟ್ ಸಿಬ್ಬಂದಿ ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ದೊಡ್ಡ ಚೀಲದಲ್ಲಿ ತುಂಬಿಟ್ಟಿದ್ದ ನಗದು ಪತ್ತೆಯಾಗಿದೆ.
ಈ ಬಗ್ಗೆ ಗಿರೀಶ್ ಅವರನ್ನು ಚುನಾವಣಾಧಿಕಾರಿಗಳು ಪ್ರಶ್ನಿಸಿದಾಗ ಸೂಕ್ತ ಉತ್ತರ, ಹಣಕ್ಕೆ ಪೂರಕ ದಾಖಲೆ ನೀಡಿರಲಿಲ್ಲ. ಹೀಗಾಗಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಚುನಾವಣಾಧಿಕಾರಿಗಳು ಮದ್ದೂರು ಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ, ತಹಶೀಲ್ದಾರ್ ಕೆ.ಎಸ್.ಸೋಮಶೇಖರ್, ಮದ್ದೂರು ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೆ.ಆರ್.ಪ್ರಸಾದ್, ಚುನಾವಣಾಧಿಕಾರಿ ಲೋಕನಾಥ್ ಸ್ಥಳದಲ್ಲಿ ಹಾಜರಿದ್ದರು.