Visitors have accessed this post 184 times.
ಉಡುಪಿ: ಚಾನೆಲ್ ಒಂದರ ಸುದ್ದಿ ವಿಡಿಯೋ ಬಳಸಿ ರಘುಪತಿ ಭಟ್ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಬ್ರೇಕಿಂಗ್ ನ್ಯೂಸ್ ಎಂಬ ಸುಳ್ಳು ಸುದ್ಧಿಯ ವಿಡಿಯೋ ತುಣುಕೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದರ ಬಗ್ಗೆ ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಚುನಾವಣಾಧಿಕಾರಿಯವರಿಗೆ ದೂರು ನೀಡಿದ್ದಾರೆ. ನನಗೆ ನೈಋತ್ಯ ಪದವೀಧರರ ಕ್ಷೇತ್ರದಾದ್ಯಂತ ಅಪಾರ ಬೆಂಬಲ ವ್ಯಕ್ತವಾಗಿರುವುದರಿಂದ ಕಳೆದ ನಾಲ್ಕೈದು ದಿನಗಳಿಂದ ಎದುರಾಳಿಗಳು ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ತೇಜೋವಧೆ ಹಾಗೂ ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿದ್ದರು. ಆದರೆ ಚುನಾವಣೆಯ ಮುಂಚಿನ ದಿನ ರಾತ್ರಿ ಸುವರ್ಣ ಚಾನೆಲ್ನ ಬ್ರೇಕಿಂಗ್ ನ್ಯೂಸ್ ಎಂಬಂತೆ ಬಿಂಬಿಸಿ ನಾನು ಚುನಾವಣೆಯಿಂದ ಹಿಂದೆ ಸರಿದಿರುವುದಾಗಿ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಆದ್ದರಿಂದ ಚುನಾವಣಾ ಕಣದಲ್ಲಿರುವ ನನಗೆ ಈ ರೀತಿ ಸುಳ್ಳು ಸುದ್ಧಿ ಹಬ್ಬಿಸಿರುವುದರಿಂದ ಮತದಾರರು ಗೊಂದಲಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಸುಳ್ಳು ಸುದ್ಧಿ ಬಿತ್ತರಿಸಿದವರನ್ನು ಪತ್ತೆ ಮಾಡಿ ತಕ್ಷಣದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ತಿಳಿಸಿದ್ದಾರೆ.