January 17, 2026
WhatsApp Image 2024-08-28 at 11.05.18 AM

ಕಡಬ ತಾಲೂಕು ಕುಂತೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಬದಿಯಲ್ಲಿ ಜಿ.ಸಿ.ಬಿ ಯಿಂದ ಕೆಲಸ ಮಾಡುವ ಸಂದರ್ಭದಲ್ಲಿ ಶಾಲಾ ಕಟ್ಟಡದ ಹಿಂಬದಿಯ ಗೋಡೆ ಸಂಪೂರ್ಣವಾಗಿ ಬಿದ್ದಿದೆ. ಪರಿಣಾಮ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಫಾತಿಮತ್ ಸುಹಾನ, ರಶ್ಮಿ, ದೀಕ್ಷೀತಾ, ಯಶ್ಮಿತಾ ಎಂಬವರು ಗಾಯಗೊಂಡ ವಿದ್ಯಾರ್ಥಿನಿಯರು. ಇವರನ್ನು ವೈದ್ಯಕೀಯ ಚಿಕಿತ್ಸೆ ನೀಡುವ ಸಲುವಾಗಿ ಸರಕಾರಿ ಆಸ್ಪತ್ರೆ ಪುತ್ತೂರಿಗೆ ದಾಖಲಿಸಲಾಗಿದೆ. ಶಾಲಾ ಕಟ್ಟಡ ಕುಸಿದ ವಿಚಾರದಲ್ಲಿ ಹೊಣೆಗಾರರಾಗಿರುವ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗೆಗಿನ ಅಧಿಕೃತ ಆದೇಶ ಲಭ್ಯವಾಗಬೇಕಿದೆ. ಶಿಥಿಲಗೊಂಡಿರುವ ಕಟ್ಟಡದ ಬಳಿ ಜೆಸಿಬಿ ಯಂತ್ರದ ಕೆಲಸ ಮಾಡಿರುವುದೇ ಅನಾಹುತಕ್ಕೆ ಕಾರಣ ಎಂದು ತಿಳಿದುಬಂದಿದೆ. ಮಕ್ಕಳು ಆಟವಾಡುವ ಸಲುವಾಗಿ ಹೊರಗಡೆ ಹೋಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿ ಕೂಡಲೇ ಸಮಗ್ರ ವರದಿಯನ್ನು ಸಲ್ಲಿಸುವಂತೆ ಕಡಬ ತಹಶೀಲ್ದಾರರು, ಕಾರ್ಯನಿರ್ವಹಣಾ ಅಧಿಕಾರಿ ಇವರುಗಳಿಗೆ ಸೂಚನೆಯನ್ನು ನೀಡಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮಹೋಪಾತ್ರ, ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು ಭೇಟಿ ನೀಡಿ ಘಟನೆ ಬಗ್ಗೆ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿ ನೆರೆದಿರುವ ಪೋಷಕರು ಹಾಗೂ ಶಾಲೆಯ ಸಮಿತಿಯವರು ಪೋಷಕರು ಹಾಗೂ ಸಾರ್ವಜನಿಕರಿಗೆ ಅಧಿಕಾರಿಗಳು ಘಟನೆಯ ಬಗ್ಗೆ ಮುಂದೆ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ವಿವರಣೆ ನೀಡಲಾಯಿತು.

About The Author

Leave a Reply