

ಮೈಸೂರು: ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂಬ ಬಿಜೆಪಿ ಆರೋಪ ಹಾಸ್ಯಾಸ್ಪದ. ಬಿಜೆಪಿ ಮಾತ್ರ ಏಕೆ ಇದನ್ನು ವಿರೋಧಿಸುತ್ತದೆ? ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಭಯಪಡಬೇಕು. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದಂತ ಅವರು, ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ? ಶಾಂತಿ ಹಾಗೂ ಭ್ರಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದ್ದೇವೆ. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿಯೇ ಎಂದಿದ್ದಾರೆ.
ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಸರ್ಕಾರದ ಬಳಿ ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ? ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ? ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ, ಹಣ ಇನ್ನು ಬಿಡುಗಡೆಯಾಗಿಲ್ಲ ಅಷ್ಟೆ ಎಂದರು.






