March 6, 2026
WhatsApp Image 2026-03-06 at 5.37.53 PM

ಪುತ್ತೂರು :​ ‘ದಿ ಕೇರಳ ಸ್ಟೋರಿ 2′ ಚಿತ್ರವು ಬಿಡುಗಡೆಗೂ ಮುನ್ನವೇ ಹಲವಾರು ಕಾನೂನು ಮತ್ತು ರಾಜಕೀಯ ವಿವಾದಗಳಿಗೆ ಗುರಿಯಾಗಿತ್ತು. ಪ್ರಮುಖವಾಗಿ ಚಿತ್ರದಲ್ಲಿನ ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ಚಿತ್ರಣಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತವೆ ಎಂಬ ಆರೋಪಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ದಿ ಕೇರಳ ಸ್ಟೋರಿ 2 ಚಿತ್ರದ ಉಚಿತ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಇದರ ಸುತ್ತ ಹಲವು ವಿವಾದಗಳು ಹುಟ್ಟಿಕೊಂಡಿವೆ.

ಪುತ್ತೂರಿನ ಜಿಎಲ್ ಒನ್ ಮಾಲ್‌ನಲ್ಲಿ ಸೀತಾ ಪರಿವಾರ ಸಂಘಟನೆಯಿಂದ ಈ ಕೆಲಸ ನಡೆದಿದೆ. 16 ರಿಂದ 22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸಿನಿಮಾ ಪ್ರದರ್ಶನ ನೀಡುವ ವ್ಯವಸ್ಥೆ ಮಾಡಲಾಗಿತ್ತು. ನಿನ್ನೆ ಸಂಜೆ ಮೂರು ಪ್ರದರ್ಶನಗಳನ್ನು ಆಯೋಜಿಸಲಾಗಿದ್ದು, ಇದಕ್ಕೆ ಬಿಜೆಪಿ ಹಾಗೂ ಹಿಂದು ಸಂಘಟನೆಗಳ ಮುಖಂಡರು ಸಹ ಬೆಂಬಲ ವ್ಯಕ್ತಪಡಿಸಿದ್ದರು.

ಆದರೆ ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಸಂದೇಶಗಳು ವೈರಲ್ ಆಗಿವೆ. ಜಿಎಲ್ ಒನ್ ಮಾಲ್‌ಗೆ ಮುಸ್ಲಿಂ ಸಮುದಾಯದವರು ಹೋಗಬಾರದು ಎಂಬ ರೀತಿಯ ಸಂದೇಶಗಳು ಹರಿದಾಡುತ್ತಿದ್ದು, ಮಾಲ್‌ನ್ನು ಬಹಿಷ್ಕರಿಸುವಂತೆ ಕರೆ ನೀಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಇನ್ನು ಮುಂದೆ ಜಿಎಲ್ ಮಾಲ್‌ಗೆ ಹೋಗುವ ಮುಸ್ಲಿಂ ಯುವತಿಯರು ಎಚ್ಚರಿಕೆಯಿಂದಿರಿ ಎಂಬಂತಹ ಸಂದೇಶಗಳೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದೇ ವೇಳೆ ಸಿನಿಮಾ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಬೆದರಿಕೆ ಕರೆಗಳ ಆರೋಪವೂ ಕೇಳಿಬಂದಿದೆ. ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೋಸ್ಟರ್‌ನಲ್ಲಿ ಬುಕ್ಕಿಂಗ್‌ಗಾಗಿ ಮಹಿಳೆಯರ ಮೊಬೈಲ್ ಸಂಖ್ಯೆಯನ್ನು ನೀಡಲಾಗಿತ್ತು. ಆ ಸಂಖ್ಯೆಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದ್ದು, ಮಹಿಳೆಯರಿಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಕೆಲ ಕರೆಗಳು ವಿದೇಶಗಳಿಂದ ಬಂದಿರುವ ಸಾಧ್ಯತೆಯೂ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಬಗ್ಗೆ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯಿಸಿ, ಸ್ಥಳೀಯ ಮತಾಂಧ ಶಕ್ತಿಗಳು ಹಾಗೂ ಕೆಲವರು ವಿದೇಶದಿಂದ ಕರೆ ಮಾಡಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇಂತಹ ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ. ಮುಂದೆಯೂ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳನ್ನು ಮುಂದುವರಿಸುತ್ತೇವೆ ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿದುಬಂದಿದೆ.

About The Author

Leave a Reply