April 11, 2026
WhatsApp Image 2026-02-01 at 10.48.22 AM

ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶವನ್ನು ಏಪ್ರಿಲ್ 16ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಸೂಚನೆ ನೀಡಿದೆ.

ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಹೋರಾಟ  ನಡೆಸುತ್ತಿದ್ದ ವಿಚಾರದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ಪೊಲೀಸ್‌ ಠಾಣಾ ವ್ಯಾಪ್ತಿಗೆ 6 ತಿಂಗಳ ಕಾಲ ಗಡಿಪಾರು ಮಾಡಿ ಮಾರ್ಚ್​​ 13ರಂದು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶಿಸಿದ್ದರು.

ಈ ಆದೇಶ ರದ್ದುಪಡಿಸಬೇಕು ಎಂದು ಕೋರಿ ಮಹೇಶ್‌ ತಿಮರೋಡಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಂ ಅವರಿದ್ದ ಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ  ರಾಜ್ಯ ಸರ್ಕಾರದ ಪರ ಅಡ್ವೋಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಅವರು, ಇದು ಮೂರನೇ ಸುತ್ತಿನ ವ್ಯಾಜ್ಯವಾಗಿದೆ. ಅರ್ಜಿದಾರರನ್ನು ಗಡಿಪಾರು ಮಾಡಿ ಮೂರನೇ ಬಾರಿಗೆ ಆದೇಶ ಹೊರಡಿಸಲಾಗಿದೆ.

ಪ್ರಕರಣ ಸಂಬಂಧ ಮೇಲ್ಮನವಿ ಪ್ರಾಧಿಕಾರದಲ್ಲಿ ಪರಿಹಾರ ಕಂಡುಕೊಳ್ಳಲು ಅರ್ಜಿದಾರರಿಗೆ ಅವಕಾಶವಿದೆ. ಅರ್ಜಿದಾರರು ರೌಡಿಶೀಟರ್‌ ಆಗಿದ್ದು, ಅವರ ವಿರುದ್ಧ 26 ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಗಡಿಪಾರು ವಿಚಾರವಾಗಿ ಹೈಕೋರ್ಟ್‌ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಆದೇಶ ಮಾಡಿದೆ ಎಂದು ತಿಳಿಸಿದರು.

ಆಗ ಅರ್ಜಿದಾರರ ಪರ ವಕೀಲರು, ಅರ್ಜಿ ವಿಚಾರಣೆಯನ್ನು ಏ.16ಕ್ಕೆ ನಿಗದಿಪಡಿಸಬೇಕು ಎಂದು ಕೋರಿದರು. ಅದಕ್ಕೆ ಒಪ್ಪಿದ ಪೀಠ, ಅರ್ಜಿ ವಿಚಾರಣೆಯ್ನು ಏ.16ಕ್ಕೆ ಮುಂದೂಡಿತು. ಅಲ್ಲಿಯವರೆಗೆ ಅರ್ಜಿದಾರರ ವಿರುದ್ಧದ ಗಡಿಪಾರು ಆದೇಶ ಜಾರಿಗೊಳಿಸದಂತೆ ಸರ್ಕಾರಕ್ಕೆ ಸೂಚಿಸುವ ಮೂಲಕ ಮಧ್ಯಂತರ ಆದೇಶವನ್ನು ಮುಂದೂಡಿತು. ಅಲ್ಲದೇ, ಏ.16ರಂದು ವಾದ ಮಂಡಿಸಲು ಸಂಪೂರ್ಣವಾಗಿ ಸಿದ್ಧವಾಗಿ ಬರುವಂತೆ ಅರ್ಜಿದಾರರ ಪರ ವಕೀಲರಿಗೆ ಮೌಖಿಕವಾಗಿ ಸೂಚಿಸಿತು.

About The Author

Leave a Reply