April 12, 2026
swmya

ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಪುತ್ತೂರು ನೆಲ್ಯಾಡಿಯ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ, ಪುತ್ತೂರು ಸಬ್ ರಿಜಿಸ್ಟ್ರಾರ್ ಕಚೇರಿ ಉದ್ಯೋಗಿ ಸೌಮ್ಯ ಶೆಟ್ಟಿ ಫೆ.17ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು.

ಬಳಿಕ ಸುದೀಪ್ ಮತ್ತು ಸೌಮ್ಯ ಕಾರ್ಕಳ ಜೋಡುರಸ್ತೆಯ ಬಂಗ್ಲೆಗುಡ್ಡೆ ಕಜೆ ಎಂಬಲ್ಲಿ ವಾಸವಾಗಿದ್ದರು. ಮಾ.17ರಂದು ಸುದೀಪ್ ಕಾರಿನಲ್ಲಿ ತನ್ನ ತಾಯಿಯೊಂದಿಗೆ ಪೂಜಾ ಕಾರ್ಯಕ್ರಮದ ನಿಮಿತ್ತ ಕಡಬ ತಾಲೂಕಿನ ನೆಲ್ಯಾಡಿ ಪೇಟೆಯ ಸಮೀಪ ಹೋಗುತ್ತಿದ್ದಾಗ ಸೌಮ್ಯ ಸ್ಕೂಟಿಯಲ್ಲಿ ಬಂದು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಳು ಎಂದು ದೂರಲಾಗಿತ್ತು.

ನಂತರ ಸುದೀಪ್ ಕಾರ್ಕಳಕ್ಕೆ ಹೋಗಿದ್ದು, ಮಾ.22ರಂದು ಸುದೀಪ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಎ.24ರಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಸುದೀಪ್‌ಗೆ ಸೌಮ್ಯ ಮಾನಸಿಕ ಚಿತ್ರಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿರುವುದಾಗಿ ಮೃತರ ತಂದೆ ದಾಮೋದ‌ರ್ ರೈ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆಯನ್ನು ಎ.1ರಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಕಾರ್ಕಳ ನಗರ ಪೊಲೀಸ್‌ ಠಾಣಾ ಪ್ರಭಾರ ಪೊಲೀಸ್‌ ನಿರೀಕ್ಷಕ ಮಂಜಪ್ಪ ಡಿ.ಆರ್. ಅವರಿಗೆ ವಹಿಸಿದ್ದರು.

ಅದರಂತೆ ತನಿಖೆ ನಡೆಸಿದ ಪೊಲೀಸರು, ಪ್ರಕರಣದಲ್ಲಿ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ಪ್ರಾಥಮಿಕ ತನಿಖೆ ನಡೆಸಿ, ಸಾಕ್ಷ್ಯ ಪುರಾವೆಗಳಿಂದ ಆರೋಪಿ ಸೌಮ್ಯ ಶೆಟ್ಟಿಯನ್ನು ಎ.11ರಂದು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

About The Author

Leave a Reply