

ಮಂಗಳೂರು: ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಮದುವೆ ಕಾರ್ಯಕ್ರಮದ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾದ ಪ್ರಕರಣದಲ್ಲಿ ಹಾಲ್ ಮಾಲೀಕರು ಮತ್ತು ಆಯೋಜಕರ ವಿರುದ್ಧ ಬಜಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಏಪ್ರಿಲ್ 12ರಂದು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆದ ಈ ಘಟನೆ ವೇಳೆ, ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ನಲ್ಲಿ ಮದುವೆ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿರಲಿಲ್ಲ. ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿ 169ರ ಮೇಲೆಯೇ ವಾಹನಗಳನ್ನು ನಿಲುಗಡೆ ಮಾಡಲಾಗಿದ್ದು, ಸಂಚಾರಕ್ಕೆ ಭಾರೀ ಅಡ್ಡಿ ಉಂಟಾಗಿದೆ.ಈ ಅವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದು, ಅಪಾಯಕರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲ್ ಮಾಲೀಕರು ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ.ಭಾರತೀಯ ನ್ಯಾಯ ಸಂಹಿತೆ (BNS) ಕಲಂ 126(2), 285, 292 ಮತ್ತು ಮೋಟಾರು ವಾಹನ ಕಾಯ್ದೆ (IMV Act) ಕಲಂ 122ರಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.







