June 16, 2026
16-06-26-TA-telegram

ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆ, ವದಂತಿ ಹಾಗೂ ಆನ್‌ಲೈನ್ ವಂಚನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ವೇದಿಕೆಯಾದ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿರ್ಬಂಧ ವಿಧಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿರುವ ನಿರ್ದೇಶನದ ಪ್ರಕಾರ, ಜೂನ್ 21ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಯ ಹಿನ್ನೆಲೆಯಲ್ಲಿ ಜೂನ್ 22ರವರೆಗೆ ಟೆಲಿಗ್ರಾಮ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ನೀಟ್ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಈ ಕ್ರಮವನ್ನು ಸ್ವಾಗತಿಸಿದ್ದು, ಪರೀಕ್ಷೆಯ ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಇದು ನೆರವಾಗಲಿದೆ ಎಂದು ಅಭಿಪ್ರಾಯಪಟ್ಟಿದೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಈ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಅಥವಾ ಅನುಮಾನಗಳಿಗೆ ಅವಕಾಶ ನೀಡಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ.ಇತ್ತೀಚಿನ ವರ್ಷಗಳಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ದೇಶಾದ್ಯಂತ ಚರ್ಚೆಗೆ ಕಾರಣವಾಗಿದ್ದವು. ಈ ಹಿನ್ನೆಲೆ, ನೀಟ್ ಮರು ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಮಾಹಿತಿಯು ಸಾಮಾಜಿಕ ಜಾಲತಾಣಗಳ ಮೂಲಕ ಹರಡದಂತೆ ತಡೆಯಲು ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.ಇದೇ ವೇಳೆ, ಟೆಲಿಗ್ರಾಮ್‌ನ ಮೆಸೇಜ್ ಎಡಿಟಿಂಗ್ ವೈಶಿಷ್ಟ್ಯದ ಮೇಲೂ ಸರ್ಕಾರದ ಕಣ್ಣು ಬಿದ್ದಿದೆ. ಹಳೆಯ ಸಂದೇಶಗಳ ಸಮಯವನ್ನು ಬದಲಾಯಿಸದೆ ಅದರ ಒಳಗಿನ ಮಾಹಿತಿಯನ್ನು ತಿದ್ದುಪಡಿ ಮಾಡುವ ಅವಕಾಶವನ್ನು ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿರುವ ಆರೋಪಗಳಿವೆ. ಪರೀಕ್ಷೆ ಮುಗಿದ ಬಳಿಕ ಪ್ರಶ್ನೆಪತ್ರಿಕೆ ಮುಂಚಿತವಾಗಿ ಲಭ್ಯವಾಗಿತ್ತು ಎಂಬ ರೀತಿಯ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ವದಂತಿ ಹರಡುವ ಸಾಧ್ಯತೆಯನ್ನು ತಡೆಯಲು ಈ ವೈಶಿಷ್ಟ್ಯವನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸುವಂತೆ ಸೂಚಿಸಲಾಗಿದೆ ಎನ್ನಲಾಗಿದೆ.ಅಧಿಕಾರಿಗಳ ಪ್ರಕಾರ, ಕೆಲವು ವಂಚಕರು ಟೆಲಿಗ್ರಾಮ್ ಚಾನೆಲ್‌ಗಳ ಮೂಲಕ ಅಭ್ಯರ್ಥಿಗಳು ಮತ್ತು ಪೋಷಕರನ್ನು ಗುರಿಯಾಗಿಸಿಕೊಂಡು ಪ್ರಶ್ನೆಪತ್ರಿಕೆಗಳನ್ನು ಮುಂಚಿತವಾಗಿ ನೀಡುವುದಾಗಿ ಹೇಳಿ ಹಣ ವಸೂಲಿ ಮಾಡಲು ಯತ್ನಿಸುತ್ತಿದ್ದರು. ಇಂತಹ ಮೋಸಗಳನ್ನು ತಡೆಗಟ್ಟಲು ಕೂಡ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ 10 ಕೋಟಿಗೂ ಹೆಚ್ಚು ಮಂದಿ ಟೆಲಿಗ್ರಾಮ್ ಬಳಕೆದಾರರಿದ್ದಾರೆ. ಈ ತಾತ್ಕಾಲಿಕ ನಿರ್ಬಂಧದಿಂದ ಕೆಲವು ದಿನಗಳ ಕಾಲ ಸಾಮಾನ್ಯ ಬಳಕೆದಾರರಿಗೆ ಅಸೌಕರ್ಯ ಉಂಟಾಗಬಹುದಾದರೂ, ಪರೀಕ್ಷೆಯ ಭದ್ರತೆ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ ಅಗತ್ಯವಾಗಿದೆ ಎಂದು ಸಂಬಂಧಿತ ಅಧಿಕಾರಿಗಳು ತಿಳಿಸಿದ್ದಾರೆ.

About The Author

Leave a Reply