

ಮಂಗಳೂರು:ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾಲೇಜು ಬಸ್ ನಾಟೆಕಲ್ ಜಂಕ್ಷನ್ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಇನ್ಫೋಸಿಸ್ ಉದ್ಯೋಗಿಯೊಬ್ಬರು ಸಾವನ್ನಪ್ಪಿ, ಹಲವಾರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.
ಮೃತರನ್ನು ಇನ್ಫೋಸಿಸ್ ಉದ್ಯೋಗಿ ಹಾಗೂ ಚಿಕ್ಕಮಗಳೂರಿನ ಕುವೆಂಪುನಗರ ಮೂಲದ ಪ್ರಜ್ವಲ್ ಅರ್ನಾಲ್ಡ್ (31) ಎಂದು ಗುರುತಿಸಲಾಗಿದೆ. ಪ್ರಜ್ವಲ್ ತನ್ನ ಸಹೋದ್ಯೋಗಿ ಯುವತಿಯೊಂದಿಗೆ ಸ್ಕೂಟರ್ನಲ್ಲಿ ಕಂಬಳದ ಪದವಿನಿಂದ ಮಂಗಳೂರು ಕಡೆ ತೆರಳುತ್ತಿದ್ದ ವೇಳೆ ಪಹಿಂದಿನಿಂದ ಬಂದ ನಡುಪದವಿನ ಪಿ.ಎ. ಇಂಜಿನೀಯರಿಂಗ್ ಕಾಲೇಜಿನ ಬಸ್ ನಿಯಂತ್ರಣ ತಪ್ಪ ರಸ್ತೆ ಬದಿಯ ಕಮರಿಗೆ ಉರುಳಿದ್ದು, ಈ ವೇಳೆ ಬಸ್ಸಿನಡಿಗೆ ಸ್ಕೂಟರ್ ಕೂಡ ಸಿಲುಕಿಕೊಂಡಿದೆ.ಕೂಡಲೇ ಸಾರ್ವಜನಿಕರು ಕ್ರೇನ್ ತರಿಸಿ ಬಸ್ಸನ್ನು ಮೇಲಕ್ಕೆತ್ತಿ ಸ್ಕೂಟರ್ ಸವಾರ ಪ್ರಜ್ವಲ್ ಮತ್ತು ಅಕ್ಷತಾರನ್ನು ಹೊರ ತೆಗೆದು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಪ್ರಜ್ವಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸ್ಕೂಟರ್ ಸಹ ಸವಾರೆಗೆ ಚಿಕಿತ್ಸೆ ಮುಂದುವರಿದಿದ್ದು ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಅಪಘಾತದ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರಿಂದ ಸ್ವಲ್ಪ ಹೊತ್ತು ಸಂಚಾರ ವ್ಯತ್ಯಯ ಉಂಟಾಯಿತು. ಘಟನೆ ನಡೆದ ಸ್ಥಳಕ್ಕೆ ದಕ್ಷಿಣ ಸಂಚಾರಿ ರಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






