June 28, 2026
image-23

ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಮತ್ತೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ಪೊಲೀಸರು ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ನ್ಯಾಯಾಲಯದ ಆವರಣದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಇದೊಂದು ಹುಸಿ ಬೆದರಿಕೆ ಎಂಬುದು ದೃಢಪಟ್ಟಿದೆ.

ಜೂನ್ 26 ರಂದು ರಾತ್ರಿ 8:53 ಕ್ಕೆ ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ್ ಐಡಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಆದರೆ, ನ್ಯಾಯಾಲಯದ ಸಿಬ್ಬಂದಿ ಮರುದಿನ ಬೆಳಿಗ್ಗೆ ಜೂನ್ 27 ರಂದು ಬೆಳಿಗ್ಗೆ 11:30 ಕ್ಕೆ ಇಮೇಲ್ ಪರಿಶೀಲಿಸಿದ ವೇಳೆ ಈ ಸಂದೇಶ ಗಮನಕ್ಕೆ ಬಂದಿದೆ. ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರು.ತಕ್ಷಣವೇ ಉಡುಪಿ ನಗರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕಾಗಮಿಸಿದ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳ ನ್ಯಾಯಾಲಯದ ಎಲ್ಲಾ ನ್ಯಾಯಾಲಯ ಕೊಠಡಿಗಳು, ಕಚೇರಿಗಳು, ಶೌಚಾಲಯಗಳು ಹಾಗೂ ನ್ಯಾಯಾಲಯದ ಆವರಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಮಗ್ರ ತಪಾಸಣೆ ನಡೆಸಿತು.ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ಸ್ಫೋಟಕ ಅಥವಾ ಸಂಶಯಾಸ್ಪದ ವಸ್ತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಇದೊಂದು ಹುಸಿ ಬೆದರಿಕೆ ಎಂದು ಪೊಲೀಸರು ದೃಢಪಡಿಸಿದರು. ಶೋಧ ಕಾರ್ಯ ನಡೆಯುತ್ತಿದ್ದರೂ ನ್ಯಾಯಾಲಯದ ಕಲಾಪಗಳು ಎಂದಿನಂತೆ ಮುಂದುವರಿದವು.ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬೆದರಿಕೆ ಇಮೇಲ್ ಕಳುಹಿಸಿದವರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಇದೇ ರೀತಿಯ ಬಾಂಬ್ ಬೆದರಿಕೆ ಇಮೇಲ್ ಜೂನ್ 21ರಂದು ಕೂಡ ಬಂದಿದ್ದು, ಮರುದಿನ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಅದೂ ಹುಸಿ ಎಂದು ದೃಢಪಟ್ಟಿತ್ತು. ಪದೇ ಪದೇ ನ್ಯಾಯಾಲಯವನ್ನು ಗುರಿಯಾಗಿಸಿಕೊಂಡು ಇಂತಹ ಬೆದರಿಕೆ ಸಂದೇಶಗಳು ಬರುತ್ತಿರುವುದಕ್ಕೆ ವಕೀಲರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

About The Author

Leave a Reply