

ಭಾರಿ ಮಳೆಗೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ದುರಂತ ಅಂತ್ಯ ಕಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಂದಿರಾನಗರದಲ್ಲಿ ನಡೆದಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಬಿರುಸಿನ ಮಳೆಯಿಂದಾಗಿ ಮಣ್ಣು ಸಡಿಲಗೊಂಡು ಈ ಭೀಕರ ದುರಂತ ಸಂಭವಿಸಿದೆ. ಹಠಾತ್ತನೆ ಗುಡ್ಡದ ಮಣ್ಣು ಮತ್ತು ಬಂಡೆಗಳು ಕುಸಿದು ಬಿದ್ದ ಕಾರಣ, ಬೆಟ್ಟದ ತಪ್ಪಲಿನಲ್ಲಿದ್ದ ಮನೆ ಸಂಪೂರ್ಣವಾಗಿ ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದೆ.
ಮೃತರನ್ನು ಮಲ್ಲಿಕಾರ್ಜುನ್ (35), ನಾಗವೇಣಿ (28), ಸಂತೋಷ್ (3) ಎಂದು ಗುರುತಿಸಲಾಗಿದೆ. ಗುಡ್ಡದ ಬಳಿಯ ಶೆಡ್ ನಲ್ಲಿ ಇವರು ವಾಸಿಸುತ್ತಿದ್ದರು. ಮೃತರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳಾಗಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.







