

ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿ ಕಚೇರಿ ಬಳಿ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಕೊಲೆಯಾದ ದುರ್ದೈವಿಗಳು. ಕೊಲೆಯಾದ ರುದ್ರಪ್ಪ ಅವರ ಸಹೋದರರಾದ ಬಸಪ್ಪ ಕುಂದರಗಿ, ಸಂಗಪ್ಪ ಕುಂದರಗಿ ಹಾಗೂ ಪುತ್ರ ಮಡಿವಾಳಪ್ಪ ಕುಂದರಗಿಯನ್ನು ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆದಿದ್ದಾರೆ.
ಅಣ್ಣ-ತಮ್ಮಂದಿರ ನಡುವಿನ ಆಸ್ತಿ ವಿವಾದವೇ ಈ ಭೀಕರ ಕೊಲೆಗೆ ಕಾರಣ ಎನ್ನಲಾಗಿದೆ. ಒಟ್ಟು 38 ಗುಂಟೆ ಜಮೀನನ್ನು ಮೂವರಿಗೆ ಹಂಚಿಕೆ ಮಾಡಿ ನ್ಯಾಯಾಲಯ ಆದೇಶಿಸಿತ್ತು. ಆದರೆ, ರುದ್ರಪ್ಪ ಅವರು ತಮಗೆ ಬಂದಿದ್ದ ಪಾಲಿನ ಜಮೀನನ್ನು ಮೊದಲೇ ಮಾರಾಟ ಮಾಡಿಕೊಂಡಿದ್ದು, ಇದೀಗ ಉಳಿದ ಜಮೀನಿನಲ್ಲೂ ತಮಗೆ ಪಾಲು ಬೇಕು ಎಂದು ಪಟ್ಟು ಹಿಡಿದಿದ್ದರು. ಇದೇ ವಿಚಾರವಾಗಿ ಆಸ್ತಿ ಪಾಲುದಾರಿಕೆಗೆ ಅರ್ಜಿ ಸಲ್ಲಿಸಲು ಅವರು ಗ್ರಾಮ ಪಂಚಾಯ್ತಿಗೆ ಬಂದಿದ್ದಾಗ, ರೊಚ್ಚಿಗೆದ್ದ ಸಹೋದರರು ತಂದೆ-ಮಗಳ ಮೇಲೆ ದಾಳಿ ನಡೆಸಿ ಕೊಲೆ ಮಾಡಿದ್ದಾರೆ. ಈ ಮಾರಣಾಂತಿಕ ದಾಳಿಯ ವೇಳೆ ರುದ್ರಪ್ಪ ಅವರ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.






