ಮಂಗಳೂರು : ಹೆಡ್‌ಕಾನ್‌ಸ್ಟೆಬಲ್‌ ರಶೀದ್‌ ಸೇರಿ 56 ಪೊಲೀಸ್‌ ಸಿಬ್ಬಂದಿಯ ವರ್ಗಾವಣೆ

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಬಜ್ಪೆ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ರಶೀದ್ ಸೇರಿ ಹಲವು ಪೊಲೀಸರನ್ನು ಮಂಗಳೂರು ಕಮಿಷನರೇಟ್‌ ವಲಯ ವರ್ಗಾಯಿಸಿದೆ. ಬಜ್ಪೆ ಠಾಣೆ ಹೆಡ್‌ಕಾನ್ಸ್‌ಟೇಬಲ್ ರಶೀದ್​ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಸುಹಾಸ್‌ ಶೆಟ್ಟಿ ಹತ್ಯೆಗೆ ರಶೀದ್‌ ಪರೋಕ್ಷವಾಗಿ ನೆರವು ನೀಡಿದ್ದಾರೆಂದು ಕೆಲವು ಹಿಂದು ಮುಖಂಡರು ಮತ್ತು ಬಿಜೆಪಿ ನಾಯಕರು ನೇರವಾಗಿ ಆರೋಪಿಸಿದ್ದರು. ಸೋಷಿಯಲ್‌ ಮೀಡಿಯಾಗಳಲ್ಲಿ ಕೂಡ ರಶೀದ್‌ ಪಾತ್ರದ ಕುರಿತು ಬಹಳ ಚರ್ಚೆಯಾಗಿತ್ತು. ಈ ಆರೋಪಗಳನ್ನೆಲ್ಲ ನಿರಾಕರಿಸಿದ್ದ ರಶೀದ್‌ ತನ್ನ ವಿರುದ್ಧ ಆರೋಪ ಮಾಡಿದವರ ವಿರುದ್ಧ ಕೇಸ್‌ ಕೂಡ ದಾಖಲಿಸಿದ್ದಾರೆ.

ಒಟ್ಟಾರೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಹಲವು ವರ್ಷಗಳಿಂದ ಒಂದೇ ಕಡೆ ಇದ್ದ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಕರಾವಳಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಯಾಗುತ್ತಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಕೋಮು ಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಟಾಸ್ಕ್​ಫೋರ್ಸ್ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರಿ ಸರ್ಜರಿ ನಡೆಯುತ್ತಿದ್ದು, ಅನೇಕ ಪೊಲೀಸ್‌ ಸಿಬ್ಬಂದಿ ವರ್ಗಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೋಮ ಹಿಂಸಾಚಾರ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನು ಬದಲಾವಣೆ ಮಾಡಬೇಕು ಎಂಬ ಅಗ್ರಹ ವ್ಯಕ್ತವಾಗಿತ್ತು.ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮಂಗಳೂರಿಗೆ ಭೇಟಿ ನೀಡಿದ್ದ ಗೃಹ ಸಚಿವರು ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದರು. ಅದಾದ ನಂತರ ಕರಾವಳಿಯಲ್ಲಿ ಕೋಮು ಹಿಂಸಾಚಾರ ತಡೆಯುವುದಕ್ಕಾಗಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ.

Leave a Reply