ಸಂಸದ ನಳಿನ್‌ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜಾ ವಿರುದ್ಧ ಸೌಜನ್ಯ ತಾಯಿ ಆಕ್ರೋಶ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಉನ್ನತಮಟ್ಟದ ತನಿಖೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿಸುವುದಾಗಿ ಹೇಳಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜಾ ಮಾತುಕೊಟ್ಟು ಮರೆತು ಬಿಟ್ಟಿದ್ದಾರೆ ಎಂದು ಸೌಜನ್ಯ ತಾಯಿ ಕುಸುಮಾವತಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಕರ್ನಾಟಕ ಭವನದ ಸಮೀಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ದೆಹಲಿ ಚಲೋ’ ಪ್ರತಿಭಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಗಳ ಕೊಲೆಯಾಗಿ 12 ವರ್ಷಗಳು ಕಳೆದಿವೆ. ನಾವು 12 ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದ್ದೇವೆ. ಆದರೆ, ಅತ್ಯಾಚಾರಿಗಳು ನಿರಾಂತಕವಾಗಿ ಓಡಾಡುತ್ತಿದ್ದಾರೆ. ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಜನಪ್ರತಿನಿಧಿಗಳು ಜನಾಂದೋಲನದಲ್ಲಿ ಭಾಷಣ ಮಾಡಿ ಹೋಗಿದ್ದಾರೆ. ಆ ಬಳಿಕ ನಮ್ಮ ನೆರವಿಗೆ ಬಂದಿಲ್ಲ. ಪ್ರಧಾನಿ ಅವರನ್ನು ಭೇಟಿ ಮಾಡಬೇಕು ಎಂಬ ಉದ್ದೇಶದಿಂದ ದೆಹಲಿಗೆ ಬಂದಿದ್ದೇವೆ’ ಎಂದರು. ಸಂಸದ ನಳಿನ್‌ ಕುಮಾರ್ ಕಟೀಲು ಹಾಗೂ ಸ್ಥಳೀಯ ಶಾಸಕ ಹರೀಶ್‌ ಪೂಂಜಾ ಪ್ರಧಾನಿಯವರನ್ನು ಭೇಟಿ ಮಾಡಿಸುತ್ತೇವೆ ಎಂದು ವಾಗ್ದಾನ ಮಾಡಿದ್ದರು. ಬಳಿಕ ಅದನ್ನು ಮರೆತೇಬಿಟ್ಟರು. ಅವರು ನಮ್ಮ ಪರವಾಗಿ ನಿಲ್ಲಲಿಲ್ಲ’ ಎಂದು ಸೌಜನ್ಯ ತಾಯಿ ಕುಸುಮಾವತಿ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಹೋರಾಟದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಿಷೇಧಾಜ್ಞೆ ಹೇರಲಾಗಿದ್ದು, ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿದರು. ಬಳಿಕ ಪ್ರತಿಭಟನಾಕಾರರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Leave a Reply